ಬೆಂಗಳೂರು: ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 67ನೇ ಸಭೆಯ ಸೋಮವಾರ ನಡೆದಿದ್ದು, ಒಟ್ಟು 18,430.44 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಿದ್ದು, ಸುಮಾರು 15,032 ಜನರಿಗೆ ಉದ್ಯೋಗ ಲಭ್ಯವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.
ಕೃಷ್ಣಾದಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 67ನೇ ಸಭೆಯ ಬಳಿಕ ಅವರು ಮಾತನಾಡಿದರು.ಸಭೆಯಲ್ಲಿ 11 ಹೊಸ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ಹಾಗೂ 6 ಹೆಚ್ಚುವರಿ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ಸೇರಿದಂತೆ ಒಟ್ಟು 17 ಯೋಜನಾ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ. 11 ಹೊಸ ಪ್ರಸ್ತಾವನೆಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಒಟ್ಟು 14,906.9 ಕೋಟಿ ಬಂಡವಾಳ ಹೂಡಿಕೆಯಾಗಲಿದ್ದು, ಸುಮಾರು 13,050 ಉದ್ಯೋಗ ಸೃಷ್ಠಿಯಾಗಲಿದೆ. 6 ಹೆಚ್ಚುವರಿ ಬಂಡವಾಳ ಪ್ರಸ್ತಾವನೆಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ಒಟ್ಟು 3523.54 ಕೋಟಿಗಳ ಬಂಡವಾಳ ಹೂಡಿಕೆಯಾಗಲಿದ್ದು, ಸುಮಾರು 1,982 ಉದ್ಯೋಗ ಸೃಷ್ಟಿಯಾಗಲಿದೆ ಎಂದು ತಿಳಿಸಿದ್ದಾರೆ.ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಎಂ.ಬಿ. ಪಾಟೀಲ್, ಕೆ.ಜೆ. ಜಾರ್ಜ್, ಪ್ರಿಯಾಂಕ್ ಖರ್ಗೆ, ಎನ್. ಚಲುವರಾಯಸ್ವಾಮಿ, ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೀಜ್ ಹಾಗೂ ಹಿರಿಯ ಅಧಿಕಾರಿಗಳು ಇದ್ದರು.











































