ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇಂದು(ಏ.29) ಸಂಜೆಆರ್ಭಟಿಸಿದ ವರುಣನ ಅಬ್ಬರಕ್ಕೆ ಭೀಕರ ದುರಂತವೊಂದು ಸಂಭವಿಸಿದೆ. ಶಿವಾಜಿನಗರದಲ್ಲಿರುವ ಬೌರಿಂಗ್ ಆಸ್ಪತ್ರೆಯ ಎಮರ್ಜೆನ್ಸಿ ವಿಭಾಗದ ಬಳಿಯ ಕಾಂಪೌಂಡ್ ಗೋಡೆ ಕುಸಿದು ಬಿದ್ದ ಪರಿಣಾಮ, ಮೂವರು ಮಕ್ಕಳು ಸೇರಿದಂತೆ ಒಟ್ಟು 8 ಜನರು ಮೃತಪಟ್ಟಿದ್ದಾರೆ.ಬುಧವಾರ ಸಂಜೆ ನಗರದಾದ್ಯಂತ ಗಾಳಿ ಸಹಿತ ಭಾರಿ ಮಳೆಯಾಗಿದೆ. ಈ ವೇಳೆ ಮಳೆಯಿಂದ ರಕ್ಷಣೆ ಪಡೆಯಲು ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಗೋಡೆಯ ಪಕ್ಕದಲ್ಲಿದ್ದ ಟಾರ್ಪಾಲಿನ್ ಶೆಡ್ ಅಡಿಯಲ್ಲಿ ಸಾರ್ವಜನಿಕರು ಹಾಗೂ ಬೀದಿ ಬದಿ ವ್ಯಾಪಾರಿಗಳು ಆಶ್ರಯ ಪಡೆದಿದ್ದರು. ಮಳೆಯ ತೀವ್ರತೆಗೆ ಹಳೆಯದಾಗಿದ್ದ ಆಸ್ಪತ್ರೆಯ ಕಾಂಪೌಂಡ್ ದಿಢೀರನೆ ಕುಸಿದು ಬಿದ್ದಿದೆ ಪರಿಣಾಮ ಅಲ್ಲಿ ನಿಂತಿದ್ದವರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ.ಘಟನೆ ನಡೆದ ತಕ್ಷಣ ಸ್ಥಳೀಯರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಅವಶೇಷಗಳ ಅಡಿ ಸಿಲುಕಿದ್ದವರನ್ನು ಹೊರತೆಗೆದಿದ್ದಾರೆ. ಈ ದುರಂತದಲ್ಲಿ 8 ಮಂದಿ ಮೃತಪಟ್ಟಿದ್ದು ಇನ್ನೂ ಕೆಲವರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು ಅವರ ರಕ್ಷಣೆಗಾಗಿ ಜೆಸಿಬಿ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಕೇವಲ ಶಿವಾಜಿನಗರ ಮಾತ್ರವಲ್ಲದೆ, ಮೆಜೆಸ್ಟಿಕ್, ಕೆ.ಆರ್. ಮಾರುಕಟ್ಟೆ, ಕಾರ್ಪೊರೇಷನ್, ಶಾಂತಿನಗರ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಭಾರಿ ಮಳೆಯಾಗಿದ್ದು, ರಸ್ತೆಗಳು ಜಲಾವೃತಗೊಂಡಿವೆ. ಹಲವೆಡೆ ಮರಗಳು ಧರೆಗುರುಳಿದ್ದು, ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.ಘಟನಾ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.ಇನ್ನು ಘಟನೆ ಕುರಿತು ಮಾಜಿ ಮುಖ್ಯಮಂತ್ರಿ ಹಾಗೂ ಉಸ್ತುವಾರಿ ಸಚಿವ ಡಿಕೆ ಶಿವಕುಮಾರ್ ಅವಘಡ ಸಂಭವಿಸಿದ ಮಾಹಿತಿ ಸಿಕ್ಕಿದ್ದು ಘಟನಾ ಸ್ಥಳಕ್ಕೆ ತೆರಳಿ ಮಾಹಿತಿ ಕಲೆ ಹಾಕುವುದಾಗಿ ಹಾಗೆಯೇ ಗಾಯಗೊಂಡಿರುವ ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಸೂಚನೆ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.













































