ಐದು ದೇವಾಲಯಗಳಿಗೆ ಪ್ರತ್ಯೇಕ ಪ್ರಾಧಿಕಾರ: ರಾಜ್ಯಪಾಲರ ಅನುಮೋದನೆ

Picture of Savistara

Savistara

Bureau Report

ಬೆಂಗಳೂರು: ಐದು ದೇವಾಲಯಗಳಿಗೆ ಪ್ರತ್ಯೇಕವಾಗಿ ರಚಿಸಿರುವ ಪ್ರಾಧಿಕಾರಗಳ ಮಸೂದೆಗೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅನುಮೋದನೆ ನೀಡಿದ್ದಾರೆ.

ಸರ್ಕಾರದ ನಿಯಂತ್ರಣದಲ್ಲಿರುವ ಮುಜರಾಯಿ ಇಲಾಖೆಯ ಪ್ರಮುಖ ದೇವಾಲಯಗಳಲ್ಲಿ ಭಕ್ತರ ಅನುಕೂಲಕ್ಕಾಗಿ ಅಗತ್ಯವಿರುವ ಮೂಲ ಸೌಕರ್ಯಗಳನ್ನು ಒಳಗೊಂಡಂತೆ ದೇವಾಲಯಗಳ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ದೇವಾಲಯಗಳ ಅಭಿವೃದ್ಧಿ ಪ್ರಾಧಿಕಾರಗಳನ್ನು ರಚಿಸಲಾಗಿತ್ತು.ಆಯಾ ದೇವಾಲಯಗಳಲ್ಲಿ ನಿತ್ಯ ಮತ್ತು ಹಬ್ಬ, ವಿಶೇಷ ದಿನಗಳ ಸಮಯದಲ್ಲಿ ರಥೋತ್ಸವಗಳಂತಹ ಆಚರಣೆ ಹಿಂದಿನಿಂದಲೂ ನಡೆದುಕೊಂಡು ಬಂದಿವೆ. ಪೂಜಾ ವಿಧಿ ವಿಧಾನಗಳು, ರೂಢಿ ಸಂಪ್ರದಾಯಗಳು, ಪದ್ಧತಿಗಳ ಆಚರಣೆಯಲ್ಲಿ ಯಾವುದೇ ಲೋಪವಾಗದಂತೆ ನಿರ್ವಹಿಸಲು ಪರಿಣಾಮಕಾರಿಯಾಗಿ ಆಡಳಿತ ನಡೆಸುವ ದೃಷ್ಟಿಯಿಂದ ಸರ್ಕಾರವು ಈ ಪ್ರಾಧಿಕಾರಗಳಲ್ಲಿ ಮುಜರಾಯಿ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಅನುಭವವುಳ್ಳ ಗ್ರೂಪ್ ‘ಎ’ ಹಿರಿಯ ಶ್ರೇಣಿಯ ಅಧಿಕಾರಿಗಳನ್ನು ಕಾರ್ಯದರ್ಶಿಗಳ ಹುದ್ದೆಗೆ ನಿಯುಕ್ತಿಗೊಳಿಸುವುದು ಸೂಕ್ತವೆಂದು ತೀರ್ಮಾನಿಸಲಾಗಿತ್ತು.

ಮೈಸೂರು ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇವಾಲಯದ ಅಭಿವೃದ್ಧಿ ಪ್ರಾಧಿಕಾರ, ಬೆಳಗಾವಿ ಜಿಲ್ಲೆಯ ಸವದತ್ತಿ ರೇಣುಕಾ ಯಲ್ಲಮ್ಮ ದೇವಾಲಯದ ಪ್ರಾಧಿಕಾರ, ದೊಡ್ಡಬಳ್ಳಾಪುರ ತಾಲ್ಲೂಕು ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯದ ಅಭಿವೃದ್ಧಿ ಪ್ರಾಧಿಕಾರ, ಕೊಪ್ಪಳ ಜಿಲ್ಲೆ ಹುಲಿಗಿ ಹುಲಿಗಮ್ಮ ದೇವಾಲಯದ ಅಭಿವೃದ್ಧಿ ಪ್ರಾಧಿಕಾರ, ಚಾಮರಾಜನಗರ ಜಿಲ್ಲೆ ಮಹದೇಶ್ವರ ಬೆಟ್ಟ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರಗಳನ್ನು ರಚಿಸಲಾಗಿತ್ತು.

ಈ ದೇವಾಲಯಗಳ ಅಭಿವೃದ್ಧಿ ಪ್ರಾಧಿಕಾರಗಳ ಕಾನೂನು (ತಿದ್ದುಪಡಿ) ಮಸೂದೆ- 2025ರ ತಿದ್ದುಪಡಿ ಮಸೂದೆಯನ್ನು ವಿಧಾನಮಂಡಲದಲ್ಲಿ ಅಂಗೀಕರಿಸಲಾಗಿತ್ತು. ಇದೀಗ ರಾಜ್ಯಪಾಲರೂ ಅನುಮೋದನೆ ನೀಡಿದ್ದಾರೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

[t4b-ticker]
error: Content is protected !!