ಬೆಂಗಳೂರು: ‘ಚಿತ್ರದುರ್ಗದ ರೇಣುಕ ಸ್ವಾಮಿ ಕೊಲೆ ಪ್ರಕರಣದ ಸಹ ಆರೋಪಿಗಳಾದ ಸ್ಟೋನಿ ಬ್ರೂಕ್ ರೆಸ್ಟೋರೆಂಟ್ ಮಾಲೀಕ ವಿನಯ್ ಹಾಗೂ ಮೊದಲನೇ ಆರೋಪಿ ಪವಿತ್ರಾ ಗೌಡ ಸಹಾಯಕ ಪವನ್ ಸೇರಿದಂತೆ ಐವರಿಗೆ ಮಂಜೂರು ಮಾಡಲಾಗಿರುವ ಜಾಮೀನು ರದ್ದುಪಡಿಸಬೇಕು’ ಎಂದು ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ತಿರಸ್ಕರಿಸಿದೆ.
ಜಾಮೀನು ರದ್ದು ಕೋರಿ ಪ್ರಾಸಿಕ್ಯೂಷನ್ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಎಸ್.ರಾಚಯ್ಯ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ಪ್ರಕಟಿಸಿದೆ.’ಪ್ರಕರಣದ ಆರೋಪಿಗಳಾದ ವಿನಯ್, ಪವನ್, ರಾಘವೇಂದ್ರ, ನಂದೀಶ್ ಮತ್ತು ಧನರಾಜ್ ಅವರಿಗೆ ನಗರದ ಸೆಷನ್ಸ್ ನ್ಯಾಯಾಲಯ 2024ರ ಡಿಸೆಂಬರ್ 24ರಂದು ಮಂಜೂರು ಮಾಡಿರುವ ಜಾಮೀನು ರದ್ದುಪಡಿಸಬೇಕು’ ಎಂದು ಪ್ರಾಸಿಕ್ಯೂಷನ್ ಈ ಅರ್ಜಿಗಳನ್ನು ಸಲ್ಲಿಸಿತ್ತು.ವಿನಯ್, ಪವನ್, ಧನರಾಜ್, ರಾಘವೇಂದ್ರ ಪರ ಹೈಕೋರ್ಟ್ ವಕೀಲರಾದ ಆರ್.ರಂಗನಾಥ ರೆಡ್ಡಿ ಮತ್ತು ನಂದೀಶ್ ಪರ ರಾಮಸಿಂಗ್ ವಾದ ಮಂಡಿಸಿದ್ದರು.












































