ಪರಿಷತ್‌ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ

Picture of Savistara

Savistara

Bureau Report

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ.

ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ಸಿಎಂ ದಂಪತಿಗೆ ತಿರುಮಲ ತಿರುಪತಿ ದೇವಸ್ಥಾನದ (TTD) ಅಧಿಕಾರಿಗಳು ಹಾಗೂ ಅರ್ಚಕರು ಆತ್ಮೀಯವಾಗಿ ಸ್ವಾಗತಿಸಿ, ದರ್ಶನದ ವ್ಯವಸ್ಥೆ ಮಾಡಿದ್ದರು. ಪೂಜೆಯ ಬಳಿಕ ರಂಗನಾಯಕುಲ ಮಂಟಪದಲ್ಲಿ ಪಂಡಿತರು ಮುಖ್ಯಮಂತ್ರಿಗಳಿಗೆ ಆಶೀರ್ವಚನ ನೀಡಿ, ಸ್ವಾಮಿಯ ತೀರ್ಥಪ್ರಸಾದಗಳನ್ನು ಹಸ್ತಾಂತರಿಸಿದರು.

ನಾಡಿನ ಒಳಿತಿಗಾಗಿ ಸಿಎಂ ವಿಶೇಷ ಪ್ರಾರ್ಥನೆದರ್ಶನದ ಬಳಿಕ ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಫೋಟೋಗಳನ್ನು ಹಂಚಿಕೊಂಡಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಅವರು, “ತಿರುಪತಿಯ ಶ್ರೀ ವೆಂಕಟೇಶ್ವರ ಸ್ವಾಮಿಯ ಸನ್ನಿಧಿಗೆ ಧರ್ಮಪತ್ನಿಯೊಂದಿಗೆ ಭೇಟಿ ನೀಡಿ, ದೇವರ ದಿವ್ಯ ದರ್ಶನ ಪಡೆದು ನಾಡಿನ ಒಳಿತಿಗಾಗಿ ಪ್ರಾರ್ಥಿಸಿದ್ದೇನೆ. ಜಗದೋದ್ಧಾರಕ ಶ್ರೀನಿವಾಸನ ಅನುಗ್ರಹವು ಪ್ರತಿಯೊಬ್ಬರ ಮೇಲಿರಲಿ, ನಾಡು ಸಮೃದ್ಧಿಯಾಗಲಿ ಎಂದು ಆಶಿಸುತ್ತೇನೆ,” ಎಂದು ಬರೆದುಕೊಂಡಿದ್ದಾರೆ.

ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಹಾಗೂ ಇತ್ತೀಚಿನ ರಾಜಕೀಯ ಯಶಸ್ಸುಗಳ ಹಿನ್ನೆಲೆಯಲ್ಲಿ ತಿಮ್ಮಪ್ಪನಿಗೆ ಕೃತಜ್ಞತೆ ಸಲ್ಲಿಸಲು ಅವರು ಈ ಭೇಟಿ ನೀಡಿದ್ದಾರೆ ಎಂದು ಆಪ್ತ ವಲಯ ತಿಳಿಸಿದೆ.ಇತ್ತೀಚೆಗಷ್ಟೇ ಬೆಂಗಳೂರಿನ ನಗರ ದೇವತೆ ಅಣ್ಣಮ್ಮ ದೇವಿ ಹಾಗೂ ಬಿಸಿಲು ಮಾರಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ ಅವರು ತಮ್ಮ ಹರಕೆ ತೀರಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

[t4b-ticker]
error: Content is protected !!