ಮೈಸೂರು: ‘ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ವ್ಯಸನ ವಿಮುಕ್ತ ಕೇಂದ್ರಗಳು ಕಡ್ಡಾಯವಾಗಿ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಕಾಯ್ದೆಯಡಿ (ಕೆಪಿಎಂಎ) ನೋಂದಣಿ ಮಾಡಿಕೊಂಡಿರಬೇಕು. ತಪ್ಪಿದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ತಿಳಿಸಿದರು.
ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಜಿಲ್ಲೆಯಾದ್ಯಂತ ನೋಂದಣಿಯಾಗದೆ ನಡೆಸುತ್ತಿರುವ ವ್ಯಸನ ವಿಮುಕ್ತಿ ಕೇಂದ್ರಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ತಕ್ಷಣವೇ ಗುರುತಿಸಿ, ನೋಟಿಸ್ ಜಾರಿಗೊಳಿಸಬೇಕು’ ಎಂದು ಸೂಚಿಸಿದರು.’ವೈದ್ಯರ ಸಲಹಾ ಚೀಟಿ ಇಲ್ಲದೆ ಔಷಧಿಗಳನ್ನು ಮಾರುವ ಮೆಡಿಕಲ್ ಶಾಪ್ಗಳ ವಿರುದ್ಧವೂ ಕಠಿಣ ಕ್ರಮ ಜರುಗಿಸಬೇಕು. ಮಾದಕ ವ್ಯಸನಗಳಿಗೆ ಕಾರಣ ಆಗುವಂತಹ ಔಷಧಿಗಳ ಅನಧಿಕೃತ ಮಾರಾಟವನ್ನು ತಡೆಯಲು ಆರೋಗ್ಯ ಇಲಾಖೆ ಮತ್ತು ಔಷಧ ನಿಯಂತ್ರಣ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಬೇಕು’ ಎಂದು ನಿರ್ದೇಶನ ನೀಡಿದರು.ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ‘ಎಚ್.ಡಿ. ಕೋಟೆ ತಾಲ್ಲೂಲು ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿದ್ದು, ಅಲ್ಲಿ ಗಾಂಜಾ ಬೆಳೆಯುವ ಸಾಧ್ಯತೆ ಜಾಸ್ತಿ ಇದೆ. ಆದ್ದರಿಂದ ಆ ಭಾಗದಲ್ಲಿ ಹೆಚ್ಚಿನ ಕಾರ್ಯಾಚರಣೆ ನಡೆಸಲಾಗುತ್ತಿದೆ’ ಎಂದರು.
ಹೆಚ್ಚುವರಿ ಎಸ್ಪಿ ಮಲ್ಲಿಕ್ ಮಾತನಾಡಿ, ‘ಮಾದಕ ವಸ್ತುವಿನ ದುಷ್ಪರಿಣಾಮದ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ’ ಎಂದು ಹೇಳಿದರು.ಡಿಎಚ್ ಒ ಡಾ.ಪಿ.ಸಿ ಕುಮಾರಸ್ವಾಮಿ ಇದ್ದರು.











































