ಸಿದ್ದಾಪುರ ಏತ ನೀರಾವರಿ ಯೋಜನೆ ಕಾಮಗಾರಿ ತಕ್ಷಣ ಆರಂಭಿಸಲು ಮುಖ್ಯಮಂತ್ರಿ ಅವರಿಗೆ ಸಂಸದ ಬಿ.ವೈ.ರಾಘವೇಂದ್ರ ಮನವಿ

Picture of Savistara

Savistara

Bureau Report

ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಹತ್ವಾಕಾಂಕ್ಷೆಯ ಸಿದ್ದಾಪುರ ಏತ ನೀರಾವರಿ ಯೋಜನೆಯ ಕಾಮಗಾರಿಯನ್ನು ತಕ್ಷಣ ಪುನರಾರಂಭಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ. ರಾಘವೇಂದ್ರ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮತ್ತೊಮ್ಮೆ ಮನವಿ ಮಾಡಿದ್ದಾರೆ.

ಸಿದ್ದಾಪುರ ಏತ ನೀರಾವರಿ ಯೋಜನೆ ಎಲ್ಲಾ ತಾಂತ್ರಿಕ ಹಾಗೂ ತಜ್ಞರ ಸಮಿತಿಗಳ ಅನುಮೋದನೆ ಪಡೆದು ಆರಂಭಗೊಂಡಿದ್ದು, ಯೋಜನೆ ಪೂರ್ಣಗೊಂಡಲ್ಲಿ 7 ರಿಂದ 8 ಗ್ರಾಮಗಳ ಸುಮಾರು 1,200 ಹೆಕ್ಟೇರ್ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ದೊರೆಯಲಿದೆ. ರೈತ ಸಮುದಾಯದ ಬಹುಕಾಲದ ಬೇಡಿಕೆಯಾಗಿರುವ ಈ ಯೋಜನೆಯ ಕಾಮಗಾರಿಯು ಈಗಾಗಲೇ ಶೇ.56 ರಷ್ಟು ಪೂರ್ಣಗೊಂಡಿದೆ ಎಂದು ಅವರು ತಿಳಿಸಿದ್ದಾರೆ.

ಆದರೆ ಕೆಲವು ತಪ್ಪು ಮಾಹಿತಿಗಳ ಆಧಾರದ ಮೇಲೆ ಯೋಜನೆಯ ಕಾಮಗಾರಿಗೆ ತಡೆ ಉಂಟಾಗಿದ್ದು, ಕಳೆದ 6 ರಿಂದ 7 ತಿಂಗಳಿನಿಂದ ಕಾಮಗಾರಿ ಸಂಪೂರ್ಣ ಸ್ಥಗಿತಗೊಂಡಿದೆ. ವರಾಹಿ ನದಿಯಲ್ಲಿ ಸುಮಾರು 3,000 ಕ್ಯೂಸೆಕ್ಸ್ ನೀರಿನ ಹರಿವು ಲಭ್ಯವಿದ್ದು, ಈ ಯೋಜನೆಗೆ ಅಗತ್ಯವಿರುವುದು ಕೇವಲ 66 ಕ್ಯೂಸೆಕ್ಸ್ ನೀರಷ್ಟೇ ಆಗಿದೆ. ಆದ್ದರಿಂದ ಯೋಜನೆ ಜಾರಿಯಾದರೆ ಇತರೆ ಯಾವುದೇ ನೀರಾವರಿ ಅಥವಾ ಜಲವಿದ್ಯುತ್ ಯೋಜನೆಗಳಿಗೆ ತೊಂದರೆಯಾಗುವುದಿಲ್ಲ ಎಂದು ರಾಘವೇಂದ್ರ ಅವರು ಸ್ಪಷ್ಟಪಡಿಸಿದ್ದಾರೆ.ಈ ಕುರಿತು ಈಗಾಗಲೇ 2026ರ ಜನವರಿ 22ರಂದು ರಾಜ್ಯ ಸರ್ಕಾರಕ್ಕೆ ಪತ್ರ ಬರೆದು ಕಾಮಗಾರಿ ಮುಂದುವರಿಸಲು ವಿನಂತಿಸಲಾಗಿದ್ದರೂ, ಈವರೆಗೆ ಯಾವುದೇ ಕ್ರಮ ಕೈಗೊಳ್ಳದಿರುವುದು ರೈತರಲ್ಲಿ ನಿರಾಸೆ ಉಂಟುಮಾಡಿದೆ ಎಂದು ಅವರು ಹೇಳಿದ್ದಾರೆ.ಸಾವಿರಾರು ರೈತ ಕುಟುಂಬಗಳ ಹಿತದೃಷ್ಟಿಯಿಂದ ಹಾಗೂ ಕೃಷಿ ಚಟುವಟಿಕೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಸಿದ್ದಾಪುರ ಏತ ನೀರಾವರಿ ಯೋಜನೆಯನ್ನು ಮೂಲ ಅನುಮೋದಿತ ವಿನ್ಯಾಸದಂತೆ ಮುಂದುವರಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ತಕ್ಷಣ ನಿರ್ದೇಶನ ನೀಡುವಂತೆ ಸಂಸದ ರಾಘವೇಂದ್ರ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.—ಸಂಸದರ ಕಚೇರಿ, ಬೈಂದೂರು.

[t4b-ticker]
error: Content is protected !!