ರಾಮಮಂದಿರ ದೇಣಿಗೆಗೆ ಕನ್ನ| ಚಂಪತ್ ರಾಯ್ ರಾಜೀನಾಮೆ ಬಗ್ಗೆ ತಿಳಿದಿಲ್ಲ ಎಂದ VHP

Picture of Savistara

Savistara

Bureau Report

ನವದೆಹಲಿ: ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ರಾಜೀನಾಮೆ ನೀಡಿರುವ ಬಗ್ಗೆ ತನಗೆ ಯಾವುದೇ ಮಾಹಿತಿ ಇಲ್ಲ ಎಂದು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಶುಕ್ರವಾರ ತಿಳಿಸಿದೆ.

ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ 8 ಜನರ ವಿರುದ್ಧ ಎಫ್‌ಐಆ‌ರ್ ದಾಖಲಿಸಿ ಬಂಧಿಸಲಾಗಿದೆ. ಇದರ ಬೆನ್ನಲ್ಲೇ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ.’ಚಂಪತ್‌ ರಾಯ್ ಅವರು ಟ್ರಸ್ಟ್‌ಗೆ ರಾಜೀನಾಮೆ ನೀಡಿರುವ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ’ ಎಂದು ವಿಎಚ್‌ಪಿಯ ಹಿರಿಯ ಪದಾಧಿಕಾರಿಯೊಬ್ಬರು ಸುದ್ದಿಗಾರರಿಗೆ ತಿಳಿಸಿದ್ದು, ಈ ಬೆಳವಣಿಗೆಯ ಕುರಿತು ಹೆಚ್ಚಿನ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.ದೇಣಿಗೆ ವಿವಾದಕ್ಕೆ ಸಂಬಂಧಿಸಿದಂತೆ ಕಳೆದ ವಾರ ರಾಯ್ ಬೆಂಬಲಕ್ಕೆ ನಿಂತಿದ್ದ ವಿಎಚ್‌ಪಿ, ಆರೋಪಗಳ ಬಗ್ಗೆ ತನಿಖೆ ನಡೆಸುವಂತೆ ಆಗ್ರಹಿಸಿತ್ತು. ಇದೀಗ ರಾಜೀನಾಮೆ ಬಗ್ಗೆ ತಿಳಿದಿಲ್ಲ ಎಂದು ಹೇಳುವ ಮೂಲಕ ತನ್ನ ನಿಲುವಿನಲ್ಲಿ ಬದಲಾವಣೆ ಆಗಿರುವುದನ್ನು ಸೂಚಿಸಿದೆ.

ಸಂಘ ಪರಿವಾರದೊಂದಿಗೂ ರಾಯ್ ಸುದೀರ್ಘ ಒಡನಾಟ ಹೊಂದಿದ್ದು, ಅವರ ರಾಜೀನಾಮೆ ವರದಿಯ ಕುರಿತು ಆರ್‌ಎಸ್‌ಎಸ್‌ ಯಾವುದೇ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿಲ್ಲ.ಅಯೋಧ್ಯೆ ರಾಮಮಂದಿರಕ್ಕೆ ಭಕ್ತರು ದೇಣಿಗೆ ರೂಪದಲ್ಲಿ ನೀಡಿದ್ದ ಕಾಣಿಕೆ ಮತ್ತು ಬೆಲೆಬಾಳುವ ವಸ್ತುಗಳು ನಾಪತ್ತೆಯಾಗಿರುವುದಕ್ಕೆ ಸಂಬಂಧಿಸಿದಂತೆ ಈ ವಿವಾದ ಉಂಟಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಾಗಿದ್ದು, ಎಂಟು ಜನರನ್ನು ಬಂಧಿಸಲಾಗಿದೆ. ಉತ್ತರ ಪ್ರದೇಶ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಈ ಪ್ರಕರಣದ ತನಿಖೆ ನಡೆಸುತ್ತಿದೆ.ರಾಮ ಜನ್ಮಭೂಮಿ ಚಳವಳಿಯ ಪ್ರಮುಖರಲ್ಲಿ ಒಬ್ಬರಾದ ರಾಯ್ ಅವರು, 2020ರಲ್ಲಿ ಟ್ರಸ್ಟ್‌ ರಚನೆಯಾದಾಗಿನಿಂದ ಅದರ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರು ವಿಎಚ್‌ಪಿಯ ಉಪಾಧ್ಯಕ್ಷರೂ ಆಗಿದ್ದಾರೆ.

[t4b-ticker]
error: Content is protected !!