ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಸಚಿವ ಸಂಪುಟ ಪುನಾರಚನೆ ಸದ್ಯಕ್ಕೆ ನಡೆಯುವುದಿಲ್ಲ ಎಂದು ಉನ್ನತ ಮೂಲಗಳು ಖಚಿತಪಡಿಸಿವೆ. ಜುಲೈ 21 ರಿಂದ ಆಗಸ್ಟ್ 21 ರವರೆಗೆ ನಡೆಯಲಿರುವ ಸಂಸತ್ತಿನ ಮಳೆಗಾಲದ ಅಧಿವೇಶನ ಮುಕ್ತಾಯಗೊಳ್ಳುವವರೆಗೆ ಯಾವುದೇ ಬದಲಾವಣೆಗಳು ಸಾಧ್ಯವಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿವೆ.
ಸರ್ಕಾರದ ಮುಂದಿನ ಆದ್ಯತೆ ಏನು?
ವಿಶ್ವಾಸಾರ್ಹ ಮೂಲಗಳ ಪ್ರಕಾರ, ಪ್ರಧಾನಿ ಮೋದಿ ಅವರು ಮುಂದಿನ ವಾರ ಒಂದು ವಾರದ ಮಟ್ಟಿಗೆ ವಿದೇಶ ಪ್ರವಾಸ ಕೈಗೊಳ್ಳಲಿದ್ದಾರೆ. ಅವರು ಮರಳಿದ ತಕ್ಷಣವೇ, ಅಂದರೆ ಜುಲೈ20 ರಿಂದ ಸಂಸತ್ತಿನ ಮಹತ್ವದ ಮಳೆಗಾಲದ ಅಧಿವೇಶನ ಆರಂಭವಾಗಲಿದೆ. ಈ ಕಾರಣದಿಂದಾಗಿ, ಸದ್ಯಕ್ಕೆ ಸರ್ಕಾರದ ಸಂಪೂರ್ಣ ಗಮನವು ಅಧಿವೇಶನದಲ್ಲಿ ಪ್ರಮುಖ ಹಾಗೂ ನಿರ್ಣಾಯಕ ಶಾಸನಗಳನ್ನು ಮಂಡಿಸಿ, ಅಂಗೀಕರಿಸುವುದರ ಮೇಲಿದೆ.
ಅಧಿವೇಶನದ ಬಳಿಕವೇ ಹೊಸ ಸಚಿವರ ಸೇರ್ಪಡೆ
ಪಕ್ಷದ ಹೈಕಮಾಂಡ್ ತೀರ್ಮಾನದಂತೆ, ಸಂಪುಟ ವಿಸ್ತರಣೆ ಸೇರಿದಂತೆ ಯಾವುದೇ ಪ್ರಮುಖ ರಾಜಕೀಯ ನಿರ್ಧಾರಗಳನ್ನು ಅಧಿವೇಶನ ಮುಗಿದ ನಂತರವೇ ಕೈಗೊಳ್ಳಲಾಗುತ್ತದೆ. ಆಗಸ್ಟ್ 21 ರಂದು ಮಳೆಗಾಲದ ಅಧಿವೇಶನ ಮುಕ್ತಾಯಗೊಂಡ ಬಳಿಕ, ನಾಯಕರು ಸೂಕ್ತ ಸಮಯ ತೆಗೆದುಕೊಂಡು ವ್ಯವಸ್ಥಿತವಾಗಿ ಸಂಪುಟ ಪುನಾರಚನೆ ಪ್ರಕ್ರಿಯೆಗೆ ಚಾಲನೆ ನೀಡಲಿದ್ದಾರೆ ಎಂದು ವರದಿಗಳು ತಿಳಿಸಿವೆ. ಅಲ್ಲಿಯವರೆಗೆ ಸಚಿವ ಸ್ಥಾನದ ಆಕಾಂಕ್ಷಿಗಳು ಕಾಯುವುದು ಅನಿವಾರ್ಯವಾಗಿದೆ.











































