ಮಂಗಳೂರು: ಬೆಳ್ತಂಗಡಿ ತಾಲ್ಲೂಕಿನ ಕಣಿಯೂರು ಗ್ರಾಮದ ಅಡೆಂಜ ಎಂಬಲ್ಲಿ ಕಟ್ಟಡವೊಂದರಲ್ಲಿ ಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸಿಕೊಂಡು ಭಾರತೀಯ ಕರೆನ್ಸಿಯ ನಕಲಿ ನೋಟುಗಳನ್ನು ಮುದ್ರಿಸುತ್ತಿದ್ದ ಸ್ಥಳಕ್ಕೆ ಪೊಲೀಸರು ಗುರುವಾರ ದಾಳಿ ನಡೆಸಿದ್ದು, ಏಳು ಆರೋಪಿಗಳನ್ನು ಬಂಧಿಸಿದ್ದಾರೆ. ಖೋಟಾ ನೋಟು ಮುದ್ರಣಕ್ಕೆ ಬಳಸುತ್ತಿದ್ದ ಪರಿಕರಗಳನ್ನು ಹಾಗೂ ಮುದ್ರಣಗೊಂಡಿದ್ದ ಖೋಟಾ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿಗಳಾದ ಇಬ್ರಾಹಿಂ, ಶರೀಫ, ಸಂದೀಪ ಪುಂಡಲಿಕ ಶೋಳಂಬಿ, ಮಹಮ್ಮದ್ ನಬಾಸ್, ಸಲ್ಮಾನ್ ಫಾರೀಸ್, ಸಿರಾಜುದ್ದೀನ್ ಹಾಗೂ ಇರ್ಷಾದ್ ಬಂಧಿತ ಆರೋಪಿಗಳು.’ಕಣಿಯೂರು ಗ್ರಾಮದ ಅಡೆಂಜದಲ್ಲಿ ಕಟ್ಟಡವೊಂದನ್ನು ಬಾಡಿಗೆಗೆ ಪಡೆದವರು ಅಲ್ಲಿ ಖೋಟಾ ನೋಟು ಮುದ್ರಿಸುತ್ತಿರುವ ಬಗ್ಗೆ ಮಾಹಿತಿ ಬಂದಿತ್ತು. ಅದರ ಆಧಾರದಲ್ಲಿ, ಉಪ್ಪಿನಂಗಡಿ ಠಾಣೆಯ ಪಿಎಸ್ಐ ಸುತೇಶ್ ಕೆ.ಪಿ. ನೇತೃತ್ವದ ಪೊಲೀಸರ ತಂಡ ಕೊಡಗು ಜಿಲ್ಲಾ ಪೊಲೀಸರ ನೆರವಿನೊಂದಿಗೆ ಗುರುವಾರ ನಸುಕಿನಲ್ಲಿ ಆ ಬಾಡಿಗೆ ಕಟ್ಟಡಕ್ಕೆ ದಾಳಿ ನಡೆಸಿತ್ತು. ₹500 ಮುಖಬೆಲೆಯ ಒಂದು ನೋಟು, ₹500ರ ಮುಖಬೆಲೆಯ ನೋಟುಗಳಂತೆ ಕಾಣುವ ಖೋಟಾ ನೋಟುಗಳನ್ನು ಮುದ್ರಿಸಿದ್ದ ಎ-4 ಗಾತ್ರದ 21 ಹಾಳೆಗಳು, ಕಂಪ್ಯೂಟರ್, ಜೆರಾಕ್ಸ್ ಯಂತ್ರ, ಮುದ್ರೆಗಳು ಸ್ಥಳದಲ್ಲಿ ಪತ್ತೆಯಾಗಿದ್ದವು’ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕೆ. ಸುದ್ದಿಗಾರರಿಗೆ ಇಲ್ಲಿ ತಿಳಿಸಿದರು.ಆರೋಪಿಗಳ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ 2023ರ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 178ರ ಅಡಿ ಪ್ರಕಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.
ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದು ಮಣಿ ಆರ್.ಎನ್., ಕೊಡಗು ಜಿಲ್ಲಾ ಪೊಲೀಸ್ ಹೆಡ್ ಕಾನ್ಸ್ಟೆಬಲ್ಗಳಾದ ಯೋಗೀಶ್ ಬಿ., ನಿರಂಜನ್ ಎಂ.ಎನ್, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವಿಶೇಷ ಘಟಕದ ಇನ್ಸ್ಪೆಕ್ಟರ್ ನಂದಕುಮಾರ್, ಎ.ಎಸ್.ಐ ದೀಪಕ್, ಹೆಡ್ ಕಾನ್ಸ್ಟೆಬಲ್ಗಳಾದ ಸತೀಶ್ ಹಾಗೂ ರವೂಫ್ ಈ ಪತ್ತೆ ಕಾರ್ಯದಲ್ಲಿ ಉಪ್ಪಿನಂಗಡಿ ಠಾಣೆಯ ಪಿಎಸ್ಐ ಅವರಿಗೆ ನೆರವಾಗಿದ್ದಾರೆ ಎಂದು ಅವರು ತಿಳಿಸಿದರು.












































