ಬೆಂಗಳೂರು: ದಕ್ಷಿಣ ಮತ್ತು ಪಶ್ಚಿಮ ವಲಯಗಳ ನಗರಪಾಲಿಕೆಗಳಲ್ಲಿ ಕಸ ಗುಡಿಸುವ ಯಂತ್ರಗಳ ಟೆಂಡರ್ನಲ್ಲಿ ಭಾರಿ ಅಕ್ರಮ ನಡೆದಿದ್ದು, ಕಮಿಷನ್ ಪಡೆಯಲು ತಾಂತ್ರಿಕ ಅರ್ಹತೆಯನ್ನೇ ಬಲಿ ಕೊಡಲಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ಆರ್. ಅಶೋಕ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಸಚಿವ ಕೃಷ್ಣ ಬೈರೇಗೌಡ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಅವರು, ಬೆಂಗಳೂರು ಜನರ ತೆರಿಗೆ ಹಣದಲ್ಲಿ ಕಸ ಹೊಡೆಯಲು ಹೊರಟಿದ್ದೀರಾ ಅಥವಾ ಕಮಿಷನ್ ಹೊಡೆಯಲು ಹೊರಟಿದ್ದೀರಾ? ಎಂದು ಖಾರವಾಗಿ ಪ್ರಶ್ನಿಸಿದ್ದಾರೆ. ಈ ಟೆಂಡರ್ ಪ್ರಕ್ರಿಯೆಯು ಕಾಂಗ್ರೆಸ್ ಸರ್ಕಾರದ “ಸ್ಯಾಮ್ ಮಾಡೆಲ್” ಆಡಳಿತಕ್ಕೆ ಸ್ಪಷ್ಟ ಉದಾಹರಣೆ ಎಂದು ಆರೋಪಿಸಿದ್ದಾರೆ.
ಈ ಬಗ್ಗೆ ಅವರು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.ಉತ್ತರ, ಪೂರ್ವ ಮತ್ತು ಕೇಂದ್ರ ಪಾಲಿಕೆಗಳಲ್ಲಿ ಸೂಕ್ತ ಮಾನದಂಡಗಳನ್ನು ಇಟ್ಟುಕೊಂಡು ಟೆಂಡರ್ ಕರೆಯಲಾಗಿದೆ. ಆದರೆ, ದಕ್ಷಿಣ ಹಾಗೂ ಪಶ್ಚಿಮ ಪಾಲಿಕೆಗಳಲ್ಲಿ ನಿರ್ದಿಷ್ಟ ಸಂಸ್ಥೆಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಏಕಾಏಕಿ ಅರ್ಹತಾ ಷರತ್ತುಗಳನ್ನು ಸಡಿಲಗೊಳಿಸಲಾಗಿದೆ. ಕಮಿಷನ್ಗಾಗಿ ತಾಂತ್ರಿಕ ಅರ್ಹತೆಯನ್ನು ಗಾಳಿಗೆ ತೂರಲಾಗಿದ್ದು, ಇದು ಕೆಟಿಪಿಪಿ ಕಾಯ್ದೆ ಸಂಪೂರ್ಣ ಉಲ್ಲಂಘನೆಯಾಗಿದೆ ಎಂದು ದೂರಿದ್ದಾರೆ.
ಒಂದು ವೇಳೆ ಟೆಂಡರ್ ಹಿಂಪಡೆಯದಿದ್ದರೆ, ಮುಂಬರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಚುನಾವಣೆಯಲ್ಲಿ ಕಾಂಗ್ರೆಸ್ಗೆ ತಕ್ಕ ಪಾಠ ಕಲಿಸುವುದು ನಿಶ್ಚಿತ ಎಂದು ಅಶೋಕ ಎಚ್ಚರಿಸಿದ್ದಾರೆ.










































