ಬೆಂಗಳೂರು: ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಬಾರದೆ ರಾಜ್ಯದಲ್ಲಿಬರಗಾಲದ ಛಾಯೆ ಆವರಿಸಿದೆ. ಕೇವಲ ಶೇ.30-35ರಷ್ಟು ಮಾತ್ರ ಮಳೆಯಾಗಿದೆ. ಆದಾಗ್ಯೂ ಬರಗಾಲ ಘೋಷಣೆ ಸದ್ಯಕ್ಕೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.ಕಾವೇರಿ ವಿಚಾರವಾಗಿ ಭಾನುವಾರ ನಡೆದ ಸರ್ವಪಕ್ಷ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಬರದ ಘೋಷಣೆ ವಿಚಾರವಾಗಿ ನಾವು ಈಗಲೇ ತೀರ್ಮಾನ ಮಾಡಿಲ್ಲ. ಆಗಸ್ಟ್ ಅಂತ್ಯದ ವೇಳೆಗೆ ಮಾಹಿತಿ ಪಡೆದ ಬಳಿಕ ಕಂದಾಯ ಸಚಿವರು ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಪರಿಶೀಲನೆ ಮಾಡುತ್ತಾರೆ. ನಂತರ ಸಚಿವ ಸಂಪುಟದಲ್ಲಿ ಮಂಡಿಸುತ್ತಾರೆ. ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಮಾಡಲಾಗುವುದು. ವಾಸ್ತವಾಂಶ ಗಮನದಲ್ಲಿಟ್ಟುಕೊಂಡು ತೀರ್ಮಾನ ಮಾಡಲಾಗುವುದು ಎಂದು ತಿಳಿಸಿದರು.ಬರ ಘೋಷಣೆ ಮಾಡುವಂತೆ ವಿರೋಧ ಪಕ್ಷದ ನಾಯಕರು ಹೇಳುತ್ತಿದ್ದರು. ಅವರೂ ಕಂದಾಯ ಸಚಿವರಾಗಿ ಅನುಭವ ಹೊಂದಿದ್ದಾರೆ. ಅವರು ರಾಜಕೀಯವಾಗಿ ಮಾತನಾಡಿದಾಗ ನಾವು ತಲೆ ಕೆಡಿಸಿಕೊಳ್ಳಲ್ಲ. ಈ ವಿಚಾರದಲ್ಲಿ ವಿರೋಧ ಪಕ್ಷದ ನಾಯಕರು ಸಲಹೆ ನೀಡಿದರೆ ಅದನ್ನು ಸ್ವೀಕರಿಸಲು ಸರ್ಕಾರ ಮುಕ್ತವಾಗಿದೆ. ಯಾರು ಏನೇ ಸಲಹೆ ಇದ್ದರು ಉಪಮುಖ್ಯಮಂತ್ರಿಗಳ ಬಳಿ ನೀಡಬಹುದು ಎಂದು ಹೇಳಿದರು.
ಸದ್ಯ ಕುಡಿಯುವ ನೀರಿಗಾಗಿ ಕೆರೆ-ಕಟ್ಟೆಗಳನ್ನು ತುಂಬಿಸಲು ಕಾವೇರಿ ಕೊಳ್ಳದ ಜಲಾಶಯಗಳಿಂದ ನಾಲೆಗಳಿಗೆ ನೀರು ಬೀಡಲು ಆದೇಶಿಸಲಾಗಿದೆ. ಕುಡಿಯುವ ನೀರಿಗೆ ಸರ್ಕಾರ ಆದ್ಯತೆ ಕೊಡುತ್ತಿದ್ದು, ಸರ್ಕಾರ ಸೂಚನೆವರೆಗೆ ಬೆಳೆ ಬೇಡ ಎಂಬ ಮನವಿಯನ್ನು ರೈತರಲ್ಲಿ ಮಾಡಲಾಗಿದೆ ಎಂದು ಇದೇ ವೇಳೆ ಮುಖ್ಯಮಂತ್ರಿಗಳು ಹೇಳಿದರು.








































