ಲಖನೌ: ಅಯೋಧ್ಯೆಯ ರಾಮಮಂದಿರದಲ್ಲಿ ನಡೆದಿದ್ದ ದೇಣಿಗೆ ಹಾಗೂ ಕಾಣಿಕೆ ಕಳ್ಳತನದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (ಎಸ್ಐಟಿ) ನೀಡಿದ್ದ ಅಂತಿಮ ವರದಿಯನ್ನು ಮುಂದಿನ ಸೂಕ್ತ ಕ್ರಮಕ್ಕಾಗಿ ಉತ್ತರ ಪ್ರದೇಶ ಗೃಹ ಇಲಾಖೆಯು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ಗೆ ಹಸ್ತಾಂತರಿಸಿದೆ ಎಂದು ಸೋಮವಾರ ಅಧಿಕೃತ ಪ್ರಕಟಣೆ ತಿಳಿಸಿದೆ.
ಈ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸುವ ಮುನ್ನವೇ, ಟ್ರಸ್ಟ್ ಮನವಿಯ ಮೇರೆಗೆ ಜೂನ್ 13 ರಂದು ರಾಜ್ಯ ಸರ್ಕಾರವು ಲಖನೌ ವಿಭಾಗೀಯ ಆಯುಕ್ತ ವಿಜಯ್ ವಿಶ್ವಾಸ್ ಪಂತ್ ಅವರ ನೇತೃತ್ವದಲ್ಲಿ ಮೂವರು ಸದಸ್ಯರ ಎಸ್ಐಟಿಯನ್ನು ರಚಿಸಿತ್ತು.ಈ ತಂಡ ಜೂನ್ 23ರಂದು ರಾಜ್ಯ ಸರ್ಕಾರಕ್ಕೆ 9 ಪುಟಗಳ ಪ್ರಾಥಮಿಕ ವರದಿಯನ್ನು ಸಲ್ಲಿಸಿತ್ತು. ಅಲ್ಲದೆ ಕೆಲವು ಕಟ್ಟುನಿಟ್ಟಿನ ಶಿಫಾರಸುಗಳನ್ನು ಮಾಡಿತ್ತು.ದೇಣಿಗೆ ಕಳವು ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆ ನಡೆಸಬೇಕು, ಟ್ರಸ್ಟ್ನ ಹಣಕಾಸು ವ್ಯವಹಾರದ ಬಗ್ಗೆ ಸಿಎಜಿ ಲೆಕ್ಕಪರಿಶೋಧನೆಗೆ ಒಳಪಡಿಸಬೇಕು ಸೇರಿದಂತೆ ಹಲವು ಅರ್ಜಿಗಳನ್ನೂ ಸುಪ್ರೀಂಕೋರ್ಟ್ ವಿಚಾರಣೆ ನಡೆಸುತ್ತಿದೆ.













































