ಬೈಂದೂರು: ಮೂಕಾಂಬಿಕಾ ರೋಡ್ ಬೈಂದೂರು ರೈಲ್ವೇ ನಿಲ್ದಾಣದ ಸಮಗ್ರ ಅಭಿವೃದ್ಧಿ ಹಾಗೂ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ಭಕ್ತರ ಅನುಕೂಲಕ್ಕಾಗಿ ಕೈಗೊಳ್ಳಲಾಗಿರುವ ಪ್ರಮುಖ ಕಾಮಗಾರಿಗಳು ಹಾಗೂ ಯೋಜನೆಗಳ ಕುರಿತು ಸಂಸದ ಬಿ.ವೈ.ರಾಘವೇಂದ್ರ ಅವರು ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಮುಖ ಮುಖ್ಯಾಂಶಗಳು:
ನಿಲ್ದಾಣದ ಮೇಲ್ದರ್ಜೆ: ಈ ಹಿಂದೆ ಕೇವಲ ಹಾಲ್ಟ್ ನಿಲ್ದಾಣವಾಗಿದ್ದ ಬೈಂದೂರು ರೈಲ್ವೇ ನಿಲ್ದಾಣವನ್ನು ₹2.64 ಕೋಟಿ ವೆಚ್ಚದಲ್ಲಿ ಸುಸಜ್ಜಿತ ನೂತನ ಕಟ್ಟಡ, ಗಣಕೀಕೃತ ಟಿಕೆಟ್ ಕಾದಿರಿಸುವಿಕೆ (PRS) ಮತ್ತು ಪ್ಲಾಟ್ಫಾರ್ಮ್ ವಿಸ್ತರಣೆಯೊಂದಿಗೆ ಮೇಲ್ದರ್ಜೆಗೇರಿಸಲಾಗಿದೆ. 50ಕ್ಕೂ ಹೆಚ್ಚು ಎಕ್ಸ್ಪ್ರೆಸ್ ರೈಲುಗಳ ನಿಲುಗಡೆ: ಒಂದೂ ಎಕ್ಸ್ಪ್ರೆಸ್ ರೈಲು ನಿಲ್ಲದ ಈ ನಿಲ್ದಾಣದಲ್ಲಿ ಪ್ರಸ್ತುತ 50ಕ್ಕೂ ಹೆಚ್ಚು ಎಕ್ಸ್ಪ್ರೆಸ್ ರೈಲುಗಳು ನಿಲುಗಡೆಯಾಗುತ್ತಿದ್ದು, ನೂರಾರು ಸ್ಥಳೀಯ ಟ್ಯಾಕ್ಸಿ ಹಾಗೂ ಆಟೋ ಚಾಲಕರಿಗೆ ಉದ್ಯೋಗಾವಕಾಶ ದೊರೆತಿದೆ.

ಕೊಲ್ಲೂರು ಕ್ಷೇತ್ರದ ಅಧಿಕೃತ ನಿಲ್ದಾಣ: ಕೊಲ್ಲೂರು ದೇವಸ್ಥಾನದಿಂದ ಕೇವಲ 27 ಕಿ.ಮೀ. ದೂರದಲ್ಲಿರುವ ಈ ನಿಲ್ದಾಣವನ್ನು ಕೊಲ್ಲೂರು ಶ್ರೀ ಮೂಕಾಂಬಿಕಾ ಕ್ಷೇತ್ರದ ಅಧಿಕೃತ ರೈಲು ನಿಲ್ದಾಣವಾಗಿ ಗುರುತಿಸಲು ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣನವರಿಗೆ ಮನವಿ ಸಲ್ಲಿಸಲಾಗಿದೆ.
₹86 ಕೋಟಿ ವೆಚ್ಚದ ಸಮಗ್ರ ಪ್ರಸ್ತಾವನೆ: ಉಡುಪಿ ಜಿಲ್ಲಾ ಕೇಂದ್ರದ ನಂತರ ಅತಿ ಹೆಚ್ಚು ಆದಾಯ ತರುವ ಈ ನಿಲ್ದಾಣವನ್ನು ‘ಸಂಪೂರ್ಣ ಸುಸಜ್ಜಿತ’ (Fully Fledged) ನಿಲ್ದಾಣವನ್ನಾಗಿ ರೂಪಿಸಲು ₹86.00 ಕೋಟಿ ವೆಚ್ಚದ ಪ್ರಸ್ತಾವನೆ ಸಲ್ಲಿಸಲಾಗಿದೆ.
ಹೆಚ್ಚುವರಿ ನಿಲುಗಡೆಗಳು & ಪ್ರವಾಸೋದ್ಯಮ: ಬಿಜೂರು ಹಾಗೂ ಸೇನಾಪುರ ರೈಲು ನಿಲ್ದಾಣಗಳಲ್ಲೂ ಪ್ರಮುಖ ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಈ ಸಂಪರ್ಕ ವಿಸ್ತರಣೆಯಿಂದ ಮರವಂತೆ ಕಡಲತೀರ ಹಾಗೂ ಒತ್ತಿನೆಣೆ ಸೂರ್ಯಾಸ್ತ ತಾಣ ಸೇರಿದಂತೆ ಕರಾವಳಿ ಭಾಗದ ಪ್ರವಾಸೋದ್ಯಮಕ್ಕೆ ಹೆಚ್ಚಿನ ಉತ್ತೇಜನ ಸಿಗಲಿದೆ.













































