ಪುತ್ತೂರಿನಲ್ಲಿ ಬಿಗಿ ಪೊಲೀಸ್‌ಬಂದೋಬಸ್ತು : 5 ಕೆಎಸ್‌ಆರ್‌ಪಿ ತುಕಡಿಗಳು, 3 ಡಿಎಆರ್ ತುಕಡಿಗಳು ಹಾಗೂ ಒಂದು ಎಸ್‌ಎಫ್‌ ತುಕಡಿ ನಿಯೋಜನೆ |ಬಲವಂತದಬಂದ್‌ಗೆ ಯತ್ನಿಸುವವರಿಗೆ ಖಡಕ್ ಎಚ್ಚರಿಕೆ

Picture of Savistara

Savistara

Bureau Report

ಪುತ್ತೂರು: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಹಾಗೂಭದ್ರತಾ ಭಾವನೆ ಹೆಚ್ಚಿಸುವ ಉದ್ದೇಶದಿಂದ ಆ.24ರಂದು ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಪಥಸಂಚಲನ ನಡೆಸಿದರು.

ಅಗಸ್ಟ್ 24 ರಂದು ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಸಹಜವಾಗಿ ಬಹುತೇಕ ಅಂಗಡಿಗಳು ಮುಚ್ಚಿರುವ ಸಾಧ್ಯತೆಯಿದೆ. ಆದರೆ ಇದರ ಹೊರತಾಗಿ ಯಾವುದೇ ಅಂಗಡಿ-ಮುಂಗಟ್ಟುಗಳನ್ನು ಬಲವಂತವಾಗಿ ಬಂದ್‌ ಮಾಡಿಸುವುದಕ್ಕೆ ಅವಕಾಶ ನೀಡುವುದಿಲ್ಲ. ಈ ನಿಟ್ಟಿನಲ್ಲಿ ಅಗತ್ಯ ಪೊಲೀಸ್‌ ಭದ್ರತಾ ವ್ಯವಸ್ಥೆ ಮಾಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಅರುಣ್ ಕೆ ತಿಳಿಸಿದ್ದಾರೆ.

ಪುತ್ತೂರಿನಲ್ಲಿ ಇತ್ತೀಚೆಗೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದು, ಸಂಬಂಧಪಟ್ಟವರಿಗೆ ನೋಟಿಸ್‌ ಜಾರಿ ಮಾಡಿದ್ದಾರೆ. ಆದರೆ ಪೊಲೀಸರು ಪ್ರಕರಣವನ್ನು ಲಘುವಾಗಿ ಪರಿಗಣಿಸುತ್ತಿದ್ದಾರೆ ಎಂಬ ವದಂತಿಗಳು ಹರಡುತ್ತಿವೆ. ಇದು ಸತ್ಯಕ್ಕೆ ದೂರವಾದ ವಿಚಾರ ಎಂದು ಎಸ್ಪಿ ಸ್ಪಷ್ಟಪಡಿಸಿದ್ದಾರೆ.

ಈ ಹಿಂದೆಯೂ ಹಲವು ಪ್ರಕರಣಗಳಲ್ಲಿ ಜಾತಿ, ಧರ್ಮ ಹಾಗೂ ರಾಜಕೀಯ ಪ್ರಭಾವಗಳನ್ನು ಪರಿಗಣಿಸದೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಈ ಕುರಿತು ಯಾರಿಗಾದರೂ ಚರ್ಚಿಸಬೇಕಿದ್ದಲ್ಲಿ ಪೊಲೀಸ್‌ ಇಲಾಖೆಯೊಂದಿಗೆ ಮುಕ್ತವಾಗಿ ಚರ್ಚಿಸಬಹುದು ಎಂದು ಅವರು ತಿಳಿಸಿದ್ದಾರೆ.

ಪುತ್ತೂರಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

ಈದ್ ಮಿಲಾದ್ ಹಿನ್ನೆಲೆಯಲ್ಲಿ ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಒಬ್ಬರು ಹೆಚ್ಚುವರಿ ಎಸ್ಪಿ. ಒಬ್ಬರು ಡಿವೈಎಸ್ಪಿ, ಎಂಟು ಪಿಎಸ್‌ಐ, 10 ಎಎಸ್‌ಐ ಹಾಗೂ 50 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.ಇದರೊಂದಿಗೆ ಐದು ಕೆಎಸ್‌ಆರ್‌ಪಿ ತುಕಡಿಗಳು. ಮೂರು ಡಿಎಆ‌ರ್ ತುಕಡಿಗಳು ಹಾಗೂ ಒಂದು ಎಸ್‌ಎಫ್ ತುಕಡಿಯನ್ನು ಭದ್ರತಾ ಕಾರ್ಯಕ್ಕೆ ನಿಯೋಜಿಸಲಾಗಿದೆ. ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರು ಶಾಂತಿ ಹಾಗೂ ಸೌಹಾರ್ದತೆಯಿಂದ ಆಚರಣೆಯಲ್ಲಿ ಪಾಲ್ಗೊಳ್ಳುವಂತೆ ಪೊಲೀಸ್ ಇಲಾಖೆ ಮನವಿ ಮಾಡಿದೆ.

[t4b-ticker]
error: Content is protected !!