ಮಂಗಳೂರು: ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಅತ್ಯಂತ ಶ್ರದ್ಧಾ-ಭಕ್ತಿಯಿಂದ ಆಚರಿಸಲ್ಪಡುವ ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಕ್ರೈಸ್ತ ಸಮುದಾಯದ ಪ್ರಮುಖ ತೆನೆ ಹಬ್ಬಕ್ಕೆ (ಮೋಂತಿ ಫೆಸ್ಟ್) ಸಾರ್ವತ್ರಿಕ ರಜೆ ಘೋಷಿಸುವಂತೆ ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಕರಾವಳಿಯಾದ್ಯಂತ ಸೆಪ್ಟೆಂಬರ್ 4 ರಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಅತ್ಯಂತ ವಿಜೃಂಭಣೆಯಿಂದ ಜರುಗಲಿದ್ದು, ಇದು ಧಾರ್ಮಿಕ ಆಚರಣೆಯಷ್ಟೇ ಅಲ್ಲದೆ ಸಂಸ್ಕೃತಿ ಮತ್ತು ನೈತಿಕ ಶಿಕ್ಷಣವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಮಹತ್ವದ ಪರಂಪರೆಯಾಗಿದೆ ಎಂದು ಶಾಸಕರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಅದೇ ರೀತಿ, ಸೆಪ್ಟೆಂಬರ್ 8 ರಂದು ಕ್ರೈಸ್ತ ಸಮುದಾಯದವರು ಆಚರಿಸುವ ಮರಿಯ ಜಯಂತಿ/ತೆನೆ ಹಬ್ಬಕ್ಕೆ ರಜೆ ನೀಡುವಂತೆ ಸಮುದಾಯದ ಮುಖಂಡರು ಕೋರಿದ್ದಾರೆ.ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ತಮ್ಮ ವಿವೇಚನಾ ಅಧಿಕಾರವನ್ನು ಬಳಸಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆಪ್ಟೆಂಬರ್ 4 ರಂದು ‘ಶ್ರೀ ಕೃಷ್ಣ ಜನ್ಮಾಷ್ಟಮಿ’ ಹಾಗೂ ಸೆಪ್ಟೆಂಬರ್ 8 ರಂದು ‘ತೆನೆ ಹಬ್ಬ’ಕ್ಕೆ ಸ್ಥಳೀಯ ಸಾರ್ವತ್ರಿಕ ರಜೆಯನ್ನು ಘೋಷಿಸಬೇಕೆಂದು ವೇದವ್ಯಾಸ ಕಾಮತ್ ಆಗ್ರಹಿಸಿದ್ದಾರೆ.

















































