ಕಸ್ತೂರಿ ರಂಗನ್ ವರದಿಯನ್ನು ಸಂಪೂರ್ಣವಾಗಿ ತಿರಸ್ಕರಿಸುವಂತೆ ಹಾಗೂ ಪಶ್ಚಿಮ ಘಟ್ಟ ಮತ್ತು ಜನವಸತಿ ಪ್ರದೇಶಗಳ ನಡುವೆ ಸ್ಪಷ್ಟ ಗಡಿ ಗುರುತಿಸಿ ಶೂನ್ಯ (0) ಬಫರ್ಝೂನ್ ಘೋಷಿಸುವಂತೆ ಆಗ್ರಹಿಸಿ ಗ್ರಾಮ ಪಂಚಾಯತ್ಗಳ ಎದುರು ಸೆಪ್ಟೆಂಬರ್ 16ರಂದು ಧರಣಿ ಸತ್ಯಾಗ್ರಹ ನಡೆಸಲು ಮಲೆನಾಡು ಜನಹಿತ ರಕ್ಷಣಾ ವೇದಿಕೆ ಕರೆ ನೀಡಿದೆ.
ಸುಳ್ಯ ತಾಲೂಕಿನಲ್ಲಿ ಈ ಕುರಿತು ಮಾಹಿತಿ ನೀಡಿದ ವೇದಿಕೆಯ ಮುಖಂಡ ಕಿಶೋರ್ ಶಿರಾಡಿ, ಸೆ.16ರಂದು ಬೆಳಿಗ್ಗೆ 10ರಿಂದ 11 ಗಂಟೆಯವರೆಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಕಾರ್ಯಕರ್ತರು ಹಾಗೂ ಗ್ರಾಮದ ರೈತರು ಪಕ್ಷಾತೀತವಾಗಿ ಧರಣಿ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.
ಮಂಗಳೂರು ಸಂಪುಟ ಸಭೆಗೆ ಒತ್ತಾಯ:
ಸೆಪ್ಟೆಂಬರ್ 18ರಂದು ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಕಸ್ತೂರಿ ರಂಗನ್ ವರದಿಯ ಕುರಿತು ಮೊದಲ ಆದ್ಯತೆಯಲ್ಲಿ ಚರ್ಚಿಸಿ ವರದಿಯನ್ನು ತಿರಸ್ಕರಿಸುವ ನಿರ್ಣಯ ಕೈಗೊಳ್ಳಬೇಕು ಎಂದು ಸರ್ಕಾರವನ್ನು ಒತ್ತಾಯಿಸಲಾಗುವುದು.ಪಶ್ಚಿಮ ಘಟ್ಟದ ಗಡಿ ಮತ್ತು ಜನವಸತಿ ಪ್ರದೇಶಗಳ ನಡುವೆ ಸ್ಪಷ್ಟತೆ ಸಿಕ್ಕಿದರೆ ಕಾಡುಪ್ರಾಣಿಗಳ ಉಪಟಳದಿಂದ ರೈತರು ಹಾಗೂ ಕೃಷಿಗೆ ಎದುರಾಗುತ್ತಿರುವ ಸಮಸ್ಯೆಗಳನ್ನು ತಪ್ಪಿಸಲು ಸಾಧ್ಯವಾಗಲಿದೆ. ಧರಣಿಯ ನಂತರ ಆಯಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ (ಪಿಡಿಒ) ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ತಲುಪಿಸಲಾಗುವುದು ಎಂದು ತಿಳಿಸಲಾಗಿದೆ.

















































