ಮಂಗಳೂರು, ಸೆಪ್ಟೆಂಬರ್ 18: ದಕ್ಷಿಣ ಕನ್ನಡ ಜಿಲ್ಲೆಪುತ್ತೂರಿನಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸುವ ಮಹತ್ವದ ನಿರ್ಧಾರವನ್ನು ರಾಜ್ಯ ಸಚಿವ ಸಂಪುಟ ಕೈಗೊಂಡಿದೆ. 2025-26ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದ್ದಂತೆ ಪುತ್ತೂರಿನಲ್ಲಿ ಜಿಲ್ಲಾ ಸರ್ಕಾರಿ ವೈದ್ಯಕೀಯ ಕಾಲೇಜು ಹಾಗೂ ಬೋಧನಾ ಆಸ್ಪತ್ರೆ ಸ್ಥಾಪನೆಗೆ ₹549.79 ಕೋಟಿ ಅನುದಾನ ಮಂಜೂರು ಮಾಡಲು ಸಂಪುಟ ಅನುಮೋದನೆ ನೀಡಿದೆ.ಮಂಗಳೂರಿನ ಪಡೀಲ್ನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ‘ಪ್ರಜಾಸೌಧ’ದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಜಿಲ್ಲೆಗೊಂದು ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಿ, ಹೆಚ್ಚಿನ ಸಂಖ್ಯೆಯಲ್ಲಿ ವೈದ್ಯರನ್ನು ಸಮಾಜದ ಸೇವೆಗೆ ಒದಗಿಸುವುದು ಸರ್ಕಾರದ ಆಶಯವಾಗಿದೆ ಎಂದು ತಿಳಿಸಲಾಗಿದೆ.ಪುತ್ತೂರು ತಾಲ್ಲೂಕಿನ ಬನ್ನೂರು ಗ್ರಾಮದ ಸೊಡಿಯಾಪು ಬಳಿ ಗುರುತಿಸಿರುವ ನಿವೇಶನದಲ್ಲಿ ಜಿಲ್ಲಾ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಲಾಗುವುದು. ಇದರೊಂದಿಗೆ ಬೋಧನಾ ಆಸ್ಪತ್ರೆ, ಹಾಸ್ಟೆಲ್ ಹಾಗೂ ಅಗತ್ಯ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಸರ್ಕಾರ ಮುಂದಾಗಿದೆ. ಈ ಸಂಪೂರ್ಣ ಯೋಜನೆಗೆ ₹549.79 ಕೋಟಿ ವೆಚ್ಚವಾಗಲಿದ್ದು, ಯೋಜನೆ ಅನುಷ್ಠಾನಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ.
ವೈದ್ಯಕೀಯ ಶಿಕ್ಷಣಕ್ಕೆ ಹೊಸ ಅವಕಾಶ
ಪುತ್ತೂರಿನಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೈದ್ಯಕೀಯ ಶಿಕ್ಷಣದ ಅವಕಾಶಗಳು ಮತ್ತಷ್ಟು ವಿಸ್ತರಿಸುವ ನಿರೀಕ್ಷೆಯಿದೆ. ಇದರೊಂದಿಗೆ ಜಿಲ್ಲೆಯ ಜನರಿಗೆ ಸರ್ಕಾರಿ ವಲಯದಲ್ಲಿ ಹೆಚ್ಚಿನ ಆರೋಗ್ಯ ಸೇವೆಗಳು ಲಭ್ಯವಾಗಲು ಅವಕಾಶ ಕಲ್ಪಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ.ಜಿಲ್ಲೆಗೊಂದು ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಿ, ವೈದ್ಯಕೀಯ ಶಿಕ್ಷಣದ ವ್ಯಾಪ್ತಿಯನ್ನು ವಿಸ್ತರಿಸುವುದು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ವೈದ್ಯರನ್ನು ಸಮಾಜದ ಸೇವೆಗೆ ನೀಡುವುದು ಸರ್ಕಾರದ ಪ್ರಮುಖ ಆಶಯವಾಗಿದೆ. ಪುತ್ತೂರಿನಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಅನುಮೋದನೆ ನೀಡಿರುವುದು ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ದೊರೆತ ಪ್ರಮುಖ ಯೋಜನೆಯಾಗಿದೆ.
ಜಿಲ್ಲೆಯ ಎರಡು ಪ್ರಮುಖ ನಿರ್ಧಾರಗಳು
ಇದೇ ಸಚಿವ ಸಂಪುಟ ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಹೆಸರನ್ನು ‘ಮಂಗಳೂರು’ ಎಂದು ಬದಲಾಯಿಸುವ ಕುರಿತು ಸಾರ್ವಜನಿಕರಿಂದ ಅಭಿಪ್ರಾಯ ಹಾಗೂ ಆಕ್ಷೇಪಣೆಗಳನ್ನು ಆಹ್ವಾನಿಸಲು ಕೂಡ ನಿರ್ಧರಿಸಲಾಗಿದೆ. ಈ ಸಂಬಂಧ ಒಂದು ತಿಂಗಳ ಕಾಲಾವಕಾಶ ನೀಡಿ ಅಧಿಸೂಚನೆ ಹೊರಡಿಸಲು ಸಂಪುಟ ತೀರ್ಮಾನಿಸಿದೆ.
















































